
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದ ವಿವಾದಿತ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಗೆ ಅವಕಾಶ ನೀಡುವ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದ್ದು ಇದರ ಬೆನ್ನಲ್ಲೇ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಇದೇ ಮೊದಲ ಬಾರಿಗೆ ಈ ಮೈದಾನದಲ್ಲಿ ಗಣೇಶೋತ್ಸವ ಜರಗುತ್ತಿದ್ದು ಐತಿಹಾಸಿಕ ದಿನಕ್ಕೆ ಸಾಕ್ಷಿಯಾಗಿದೆ.
ಈದ್ಗಾ ಮೈದಾನದಲ್ಲಿ ಇತರೆ ಧಾರ್ಮಿಕ ಕ್ರಿಯೆಗಳಿಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹುಬ್ಬಳ್ಳಿಯ ಅಂಜುಮಾನ್ ಮುಸ್ಲಿಂ ಕಮಿಟಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿಯನ್ನು ತಿರಸ್ಕರಿಸಿದ್ದು, ಗಣೇಶೋತ್ವವ ಆಚರಣೆಗೆ ಅನುಮತಿ ನೀಡಿದೆ.
ಗಣೇಶನ ವಿಗ್ರಹದ ಪ್ರತಿಷ್ಠಾಪನೆ ಸಂದರ್ಭ ಈದ್ಗಾ ಮೈದಾನಕ್ಕೆ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಗಮಿಸಿ, ವಿಶೇಷ ಪೂಜೆ ಸಲ್ಲಿಸಿದರು. ಧಾರವಾಡದಲ್ಲಿ ಪರಿಸ್ಥಿತಿ ಸಂಪೂರ್ಣ ಶಾಂತಿಯುತವಾಗಿದ್ದು, ಗಣೇಶ ಹಬ್ಬಕ್ಕೆ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡದ ನಗರ ಪೊಲೀಸ್ ಆಯುಕ್ತ ಲಾಬು ರಾಮ್ ಹೇಳಿದ್ದಾರೆ.
ಇದೇ ಮೊದಲ ಬಾರಿಗೆ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸುತ್ತಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಭದ್ರತೆಗಾಗಿ 1,500 ಪೊಲೀಸರನ್ನು ನಿಯೋಜಿಸಲಾಗಿದೆ.
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಸುವ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ತೀರ್ಮಾನದ ವಿರುದ್ಧ ಅಂಜುಮಾನ್ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿತ್ತು. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಹಾಗೂ ಅನ್ಯ ಧಾರ್ಮಿಕ ಉದ್ದೇಶಕ್ಕೆ ನೀಡಬಾರದು ಎಂಬ ಅಂಜುಮಾನ್ ಸಂಸ್ಥೆಯ ಕೋರಿಕೆಗೆ ಮಧ್ಯಂತರ ಆದೇಶ ನೀಡಲು ಹೈಕೋರ್ಟ್ ನಿರಾಕರಿಸಿದೆ.












































