
ಬೆಂಗಳೂರು: ರಾಜ್ಯದ ಪ್ರತಿ ಜಿಲ್ಲೆಗಳಲ್ಲಿರುವ ಸರ್ಕಾರಿ ಗೋಶಾಲೆಗಳಲ್ಲಿ ಜಿಲ್ಲೆಗೆ ಒಂದು ಗೋವುಗಳಂತೆ ಒಟ್ಟು 31 ಗೋವುಗಳನ್ನು ದತ್ತು ಪಡೆಯುತ್ತೇನೆ ಎಂದು ಚಿತ್ರನಟ ಕಿಚ್ಚ ಸುದೀಪ್ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಇಂದು ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಅವರೊಂದಿಗೆ ಗೋಪೂಜೆ ನೇರವೇರಿಸಿ ಮಾತನಾಡಿದ ಕಿಚ್ಚ ಸುದೀಪ್, ರಾಜ್ಯ ಸರ್ಕಾರ ಗೋಸಂಕುಲ ಸಂರಕ್ಷಣೆಯಲ್ಲಿ ಮಹತ್ವದ ಕೆಲಸ ಮಾಡುತ್ತಿದೆ. ನನ್ನನ್ನು ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯನ್ನಾಗಿ ನೇಮಕ ಮಾಡಿ ಸರ್ಕಾರ ನನ್ನ ಜವಾಬ್ದಾರಿ ಹೆಚ್ಚಿಸಿದೆ. ನನ್ನನ್ನು ನೇಮಕ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಪ್ರಭು ಚವ್ಹಾಣ್ ಅವರಿಗೆ ಕೃತಜ್ಞತೆ ತಿಳಿಸುತ್ತೇನೆ. ಸಾರ್ವಜನಿಕರು, ಚಿತ್ರರಂಗದ ಕಲಾವಿದರು, ಸಾರ್ವಜನಿಕ ಸಂಘ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಬೇಕು ಎಂದು ಮನವಿ ಮಾಡಿದರು.
ಸಿಎಂ ಬೊಮ್ಮಾಯಿ ಅವರು ತಮ್ಮ ಹುಟ್ಟುಹಬ್ಬದಂದು 11 ಗೋವು ದತ್ತು ಪಡೆಯುವ ಮೂಲಕ ‘ಪುಣ್ಯಕೋಟಿ ದತ್ತು ಯೋಜನೆ’ ಜಾರಿಗೆ ತಂದರು. ನಾನು ಕೂಡ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆದಿದ್ದೇನೆ ಎಂದು ಸಚಿವ ಪ್ರಭು ಚವ್ಹಾಣ್ ಅವರು ಹೇಳುವ ಸಂದರ್ಭ ‘ನಾನು ಕೂಡ ನಿಮ್ಮಂತೆ ದತ್ತು ಪಡೆಯುತ್ತಿದ್ದೇನೆ’ ಎಂದು ಸುದೀಪ್ ಅವರು ಸಚಿವರಿಗೆ ತಿಳಿಸಿದರು.