Karnataka

ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ: ನಾಮನಿರ್ದೇಶನ ಮಾಡಿದ ಕೇಂದ್ರ ಸರಕಾರ

ನವದೆಹಲಿ: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಕೇರಳದ ಅಥ್ಲೀಟ್ ಪಿ.ಟಿ.ಉಷಾ, ಆಂಧ್ರಪ್ರದೇಶದ ವಿ.ವಿಜಯೇಂದ್ರ ಪ್ರಸಾದ್ ಮತ್ತು ಹೆಸರಾಂತ ಸಂಗೀತ ನಿರ್ದೇಶಕ ಇಳೆಯರಾಜಾ ಅವರನ್ನು ಇಂದು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ನಾಲ್ವರೂ ಸದಸ್ಯರಿಗೆ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಪ್ರತಿ ಒಬ್ಬ ಸದಸ್ಯರಿಗೂ ಪ್ರತ್ಯೇಕವಾಗಿ ಟ್ವೀಟ್ ಮಾಡುವ ಮೂಲಕ ಅಭಿನಂದಿಸಿದ್ದಾರೆ.

ಧರ್ಮಸ್ಥಳ ಧರ್ಮಾಧಿಕಾರಿ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಗೌರವಾನ್ವಿತ ವೀರೇಂದ್ರ ಹೆಗ್ಗಡೆಯವರು ಸಮಾಜ ಸೇವಾ ಕಾರ್ಯದಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದಲ್ಲಿ ಹೆಗ್ಗಡೆಯವರು ಧಾರ್ಮಿಕ, ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿ ಮಾಡುತ್ತಿರುವ ಮಹತ್ತರವಾದ ಕಾರ್ಯವನ್ನು ವೀಕ್ಷಿಸಲು ನನಗೆ ಅವಕಾಶ ಸಿಕ್ಕಿತು. ಅವರು ಖಂಡಿತವಾಗಿಯೂ ಸಂಸದೀಯ ಕಲಾಪಗಳನ್ನು ಉತ್ಕೃಷ್ಟಗೊಳಿಸುತ್ತಾರೆ” ಎಂದು ಹೇಳಿಕೊಂಡಿದ್ದಾರೆ.

ಇನ್ನು ಮಾಜಿ ಅಥ್ಲೀಟ್ ಪಿಟಿ ಉಷಾ, ಬಾಹುಬಲಿ ಸೇರಿ ಹಲವು ಸಿನೆಮಾಗಳಿಗೆ ಕಥೆ ಚಿತ್ರಕತೆ ಬರೆದಿರುವ ಖ್ಯಾತ ಬರಹಗಾರ ವಿಜಯೇಂದ್ರ ಪ್ರಸಾದ್ (ಬಾಹುಬಲಿ ನಿರ್ದೇಶಕ ರಾಜಮೌಳಿ ಅವರ ತಂದೆ), ಹೆಸರಾಂತ ಸಂಗೀತ ನಿರ್ದೇಶಕ ಇಳಯರಾಜ ಅವರು ಈ ಬಾರಿ ರಾಜ್ಯಸಭೆಗೆ ಕಳೆ ಹೆಚ್ಚಿಸಲಿದ್ದಾರೆ.

ಸುದ್ದಿಯನ್ನು ನೇರವಾಗಿ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ ನಮ್ಮ ವಾಟ್ಸಾಪ್ ಗುಂಪು ಸೇರಿರಿ:
https://chat.whatsapp.com/DI9IChQqUYvJCGBVIqBvwL

Exit mobile version