
ಕಲ್ಬುರ್ಗಿ: ಕಲ್ಬುರ್ಗಿ ಜಿಲ್ಲೆಯಳ್ಳಿ ನಡೆದ ಭೀಕರ ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ನಡೆದಿದೆ. ಜಿಲ್ಲೆಯ ಅಫಜಲಪುರ ಹೊರವಲಯದಲ್ಲಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಕಾರಿನಲ್ಲಿದ್ದವರು ಗಾಣಗಾಪುರ ದತ್ತಾತ್ರೇಯ ದೇಗುಲ ಭೇಟಿ ಮಾಡಿ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಫಜಲಪುರದಿಂದ ಮಹಾರಾಷ್ಟ್ರದ ಕಡೆಗೆ ಹೊರಟ್ಟಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಚಾಲಕ ಮತ್ತು ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಈ ವೇಳೆ ಮೂವರು ಗಂಭೀರ ಗಾಯಗೊಂಡಿದ್ದು ಅವರನ್ನು ಕಲಬುರಗಿಯ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ.
ಅಫಜಲಪುರದಿಂದ ಮಾಹಾರಾಷ್ಟ್ರದ ಸೊಲ್ಲಾಪುರಕ್ಕೆ ಹೋಗುವ ಮಾರ್ಗ ಮಧ್ಯೆ ಇರುವ ದುಧನಿ ಬಳಿಯ ತಿರುವಿನಲ್ಲಿ ಈ ಅಪಘಾತ ನಡೆದಿದೆ. ಅತಿ ವೇಗದಲ್ಲಿದ್ದ ವಾಹನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಅಫಜಲಪುರ ಠಾಣಾ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.












































