
ಬೆಂಗಳೂರು: ಮುಷ್ಕರ ವಾಪಾಸ್ ಪಡೆಯಲು ಕೋಟಿ ಕೋಟಿ ಡೀಲ್ ಮಾಡಿದ ಆರೋಪ ಎದುರಿಸುತ್ತಿರುವ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಉಚ್ಛಾಟನೆ ಮಾಡಲಾಗಿದೆ. ರೈತ ಸಂಘದ ನೂತನ ರಾಜ್ಯಾಧ್ಯಕ್ಷರಾಗಿ ಹೆಚ್ ಆರ್ ಬಸವರಾಜಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ಇಂದು ಶಿವಮೊಗ್ಗದಲ್ಲಿ ನಡೆದ ರೈತ ಸಂಘ, ಹಸಿರು ಸೇನೆ ಸಭೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ನಿರ್ಣಯ ಅಂಗೀಕರಿಸಲಾಯಿತು. ಕೋಟಿ ಕೋಟಿ ಡೀಲ್ ಬಗ್ಗೆ ಕೋಡಿಹಳ್ಳಿ ಚಂದ್ರಶೇಖರ್ ಯಾವುದೇ ಮಾತು ಆಡಿಲ್ಲ. ಅವರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ನೂತನ ಅಧ್ಯಕ್ಷ ಹೆಚ್ ಆರ್ ಬಸವರಾಜಪ್ಪ ಹೇಳಿದ್ದಾರೆ.
ಕೋಡಿಹಳ್ಳಿ ಅವರು ಪ್ರಾಮಾಣಿಕರಾಗಿದ್ದರೆ ನೈತಿಕ ಹೊಣೆಹೊತ್ತು ಅಧ್ಯಕ್ಷ ಸ್ಥಾನಕ್ಕೆ ಅವರೇ ರಾಜಿನಾಮೆ ನೀಡಬೇಕಿತ್ತು. ಆದರೆ ತಾವು ರಾಜಿನಾಮೆ ನೀಡುವುದಿಲ್ಲ ಎಂದು ಹೇಳಿದ್ದರು. ಹೀಗಾಗಿ ತುರ್ತು ಸಭೆ ಸೇರಿ ಅವರನ್ನು ಅಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಲಾಗಿದೆ ಎಂದರು.
ಈ ಹಿಂದೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಮುಷ್ಕರ ಸಂದರ್ಭ ಮುಷ್ಕರ ವಾಪಸು ಪಡೆಯಲು ೩೫ ಕೋಟಿ ರೂ ಗಳ ಡೀಲ್ ಮಾಡಿದ್ದ ಬಗ್ಗೆ ಸ್ವತಃ ಕೋಡಿಹಳ್ಳಿ ಚಂದ್ರಶೇಖರ್ ಕನ್ನಡ ಟಿವಿ ಮಾಧ್ಯಮವೊಂದರ ಸ್ಟಿಂಗ್ ಆಪರೇಷನ್ ನಲ್ಲಿ ಬಾಯ್ಬಿಟ್ಟಿದ್ದರು.