Karnataka

ಆಂಧ್ರಪ್ರದೇಶ ನೂತನ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ಮೂಡಬಿದ್ರೆಯ ಅಬ್ದುಲ್ ನಜೀರ್ ನೇಮಕ

ಬೆಂಗಳೂರು: ಸುಪ್ರೀಂ ಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ದಕ್ಷಿಣ ಕನ್ನಡ ಜಿಲ್ಲೆಯ ಸೈಯದ್ ಅಬ್ದುಲ್ ನಜೀರ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಆಂಧ್ರಪ್ರದೇಶದ ನೂತನ ರಾಜ್ಯಪಾಲರಾಗಿ ನೇಮಕ ಮಾಡಿದ್ದಾರೆ.

ರಾಷ್ಟ್ರಪತಿಗಳು ಇಂದು ಬಿಡುಗಡೆ ಮಾಡಿದ 12 ನೂತನ ರಾಜ್ಯಪಾಲ ಮತ್ತು ಲೆಫ್ಟಿನೆಂಟ್ ಗವರ್ನರ್​ಗಳ ಪಟ್ಟಿಯಲ್ಲಿ ಅಬ್ದುಲ್ ನಜೀರ್ ಹೆಸರೂ ಇದೆ. ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದಲ್ಲಿ ಜನಿಸಿದ ಎಸ್ ಅಬ್ದುಲ್ ನಜಿರ್ ಅವರು ಮಹಾವೀರ ಕಾಲೇಜಿನಲ್ಲಿ ಬಿಕಾಂ ಮತ್ತು ಎಸ್​ಡಿಎಂ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು. ಬಳಿಕ ಕರ್ನಾಟಕ ಹೈಕೋರ್ಟ್ ವಕೀಲರಾಗಿ ನೇಮಕವಾದರು. 2017ರ ಫೆಬ್ರುವರಿಯಲ್ಲಿ ಹೈಕೋರ್ಟ್ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದರು. ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾಗದೇ ನೇರವಾಗಿ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾದ ಮೂರನೇ ಜಡ್ಜ್ ಅವರಾಗಿದ್ದಾರೆ.

ದೇಶದೆಲ್ಲೆಡೆ ವಿವಾದ ಸೃಷ್ಟಿಸಿದ್ದ ತ್ರಿವಳಿ ತಲಾಖ್ ಪ್ರಕರಣದ ವಿಚಾರಣೆ ನಡೆಸಿದ ಬಹು ಧರ್ಮೀಯ ಪೀಠದಲ್ಲಿ ಹಾಗು ಅಯೋಧ್ಯೆ ವಿವಾದದ ಬಗ್ಗೆ ತೀರ್ಪು ನೀಡಿದ ಸುಪ್ರೀಂ ತೀರ್ಪಿನ 5 ನ್ಯಾಯಾಧೀಶರ ಪೀಠದಲ್ಲಿ ನ್ಯಾಯಮೂರ್ತಿ ಸೈಯದ್ ಅಬ್ದುಲ್ ನಜೀರ್ ಇದ್ದರು.

ನಜೀರ್ ಅವರು ರಾಜ್ಯಪಾಲರಾಗಿ ನೇಮಕವಾದ ಬೆನ್ನಲ್ಲೇ ಕರ್ನಾಟಕ ಮುಖ್ಯಮಂತ್ರಿ ಆದಿಯಾಗಿ ಹಲವಾರು ಶುಭಾಶಯಗಳನ್ನು ತಿಳಿಸಿದ್ದಾರೆ.

Exit mobile version