Karnataka

ಶಿವಮೊಗ್ಗ ಉದ್ವಿಗ್ನ: ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಎಂಬಾತನ ಭೀಕರ ಹತ್ಯೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಅಂಗಡಿಗಳ ಮೇಲೆ, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು ನಗರದಾದ್ಯಂತ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಪರಿಸ್ಥಿತಿ ನಿಯಂತ್ರಣಕ್ಕೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಸೆಕ್ಷನ್‌ 144 ಜಾರಿಗೊಳಿಸಲಾಗಿದೆ. ಭಾನುವಾರ ರಾತ್ರಿ 9 ಗಂಟೆಯ ಹೊತ್ತಿಗೆ ಕಾರಿನಲ್ಲಿ ಆಗಮಿಸಿದ 5-6 ಮಂದಿ ಹರ್ಷನನ್ನು ಅಟ್ಟಾಡಿಸಿಕೊಂಡು ಮಾರಕಾಸ್ತ್ರಗಳಿಂದ ಕಡಿದು ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಗಾಯಗೊಂಡು ನರಳಾಡುತ್ತಿದ್ದ ಹರ್ಷನನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಯಿಸಿತಾದರೂ ಪ್ರಾಣ ಉಳಿಸಲಾಗಲಿಲ್ಲ.

ಹರ್ಷನ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದ್ದು, ಮೆಗ್ಗಾನ್ ಜಿಲ್ಲಾಸ್ಪತ್ರೆಯಿಂದ ಮೆರವಣಿಗೆ ಮೂಲಕ ಮೃತದೇಹವನ್ನು ಮೃತನ ಮನೆಗೆ ಸಾಗಿಸಲಾಗುತ್ತಿದೆ. ಅಲ್ಲಲ್ಲಿ ಉದ್ರಿಕ್ತರ ಗುಂಪು ಅಲ್ಲಲ್ಲಿ ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿವೆ.

ಕಲ್ಲು ತೂರಾಟದ ನಂತರ ಅಲವತ್ತುಕೊಂಡಿರುವ ಕೆಲ ಅಲ್ಪಸಂಖ್ಯಾತರು ನಮ್ಮನ್ನು ಬದುಕಲು ಬಿಡಿ, ಈಶ್ವರಪ್ಪ ಒಬ್ಬ ಗೂಂಡಾ ಎಂದು ಅರಚಾಡುತ್ತಿದ್ದುದು ಕಂಡು ಬಂತು.

ಹತ್ಯೆಯಲ್ಲಿ ಭಾಗಿಯಾದ ಓರ್ವ ಶಂಕಿತ ಆರೋಪಿ ವಶ: ಹರ್ಷನ ಕೊಲೆ ಪ್ರಕರಣದದಲ್ಲಿ ಒಬ್ಬ ಆರೋಪಿಯನ್ನು ಪೊಲೀಸರು ಸೋಮವಾರ ಬೆಳಗ್ಗೆ ಬಂಧಿಸಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನ ಮೂಲಕ ಕೊಲೆ ಪ್ರಕರಣದಲ್ಲಿ ಯಾರೆಲ್ಲಾ ಇದ್ದಾರೆ, ಯಾವ ಕಾರಣಕ್ಕಾಗಿ ಈ ಕೊಲೆ ನಡೆದಿದೆ, ಹಿಜಾಬಿಗೂ ಇದಕ್ಕೂ ಸಂಬಂಧ ಇದೆಯೇ ಹೀಗೆ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸಲಿದ್ದಾರೆ.

Exit mobile version