
ಬೆಂಗಳೂರು: ಪ್ರಮುಖ ಬೆಳವಣಿಗೆಯಲ್ಲಿ ಆಟೋ ರಿಕ್ಷಾ, ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್, ಲಾರಿ, ಬಸ್ ಹಾಗು ಇತರೆ ವಾಹನಗಳ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಕಲ್ಪಿಸುವ ಸಲುವಾಗಿ ರಾಜ್ಯದ ಕಾರ್ಮಿಕ ಇಲಾಖೆ ವತಿಯಿಂದ ‘ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಸುಂಕ ವಿಧೇಯಕ- 2024’ಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಂದಿನ ತಿಂಗಳು ಫೆಬ್ರವರಿಯಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಈ ವಿಧೇಯಕ ಮಂಡನೆಯಾಗಲಿದೆ.
ಏನಿದೆ ವಿಧೇಯಕದಲ್ಲಿ?: ಆಟೋ, ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್, ಲಾರಿ, ಬಸ್ ಹಾಗು ಇತರೆ ವಾಹನಗಳಲ್ಲಿ ದುಡಿಯುವ ಕಾರ್ಮಿಕರು ಅಪಘಾತದಿಂದ ನಿಧನರಾದರೆ ಅಥವಾ ಸಂಪೂರ್ಣ ಶಾಶ್ವತ ಅಂಗ ವೈಕಲ್ಯತೆ ಹೊಂದಿದರೆ ಅವರನ್ನು ಅವಲಂಬಿಸಿರುವ ಕುಟುಂಬವು ಸಾಮಾಜಿಕ ಮತ್ತು ಆರ್ಥಿಕವಾಗಿ ತೊಂದರೆಗೆ ಸಿಲುಕುತ್ತವೆ. ಹೀಗಾಗಿ ಈ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಸರಕಾರ ತೀರ್ಮಾನಿಸಿದೆ. ಅಸಂಘಟಿತ ವಲಯದಲ್ಲಿರುವ ಶೇ. 83ಕ್ಕಿಂತ ಹೆಚ್ಚು ಕಾರ್ಮಿಕರು ಈ ಸೌಲಭ್ಯ ಪಡೆಯಲಿದ್ದಾರೆ. ಸದ್ಯ ಖಾಸಗಿ ವಾಣಿಜ್ಯ ವಾಹನ ಚಾಲಕರು, ನಿರ್ವಾಹಕರು, ಕ್ಲೀನರ್ಗಳಿಗೆ ಅಪಘಾತ ಪರಿಹಾರ ಸೌಲಭ್ಯ ಹಾಗೂ ಶೈಕ್ಷಣಿಕ ಧನಸಹಾಯವನ್ನು ‘ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ’ಯಡಿ ಒದಗಿಸಲಾಗುತ್ತಿದೆ.












































