
ಬೆಂಗಳೂರು: ರಾಜ್ಯ ಸರ್ಕಾರ ಸಾರ್ವಜನಿಕ ಕಾಮಗಾರಿಗಳಲ್ಲಿ ಶೇಕಡಾ 40ರಷ್ಟು ಕಮಿಷನ್ ಪಡೆದುಕೊಳ್ಳುತ್ತಿರುವ ಬಗ್ಗೆ ದಾಖಲೆ ಬಿಡುಗಡೆ ಮಾಡಿದರೆ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯದ ಬಿಜೆಪಿ ಸರ್ಕಾರ ಪತನಗೊಳ್ಳಲಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ.
ಈ ದಾಖಲೆಗಳು ರಾಜ್ಯ ಸರಕಾರದ ಮರಣ ಶಾಸನವಾಗಿದ್ದುಮ್, ದಾಖಲೆಗಳು ಬಿಡುಗಡೆಗೊಂಡರೆ ನೀರಾವರಿ, ಪಿಡಬ್ಲ್ಯೂಡಿ ಸೇರಿದಂತೆ ಇತರೆ ಇಲಾಖೆಗಳ 4 ಮಂದಿ ಮುಖ್ಯ ಇಂಜಿನಿಯರುಗಳು ಕೆಲಸ ಕಳೆದುಕೊಳ್ಳಲಿದ್ದಾರೆ. ಜತೆಗೆ ಸುಮಾರು 25ರಷ್ಟು ಸಚಿವರು ಶಾಸಕರುಗಳ ಹೆಸರೂ ಹೊರಗೆ ಬರಲಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಡಿ. ಕೆಂಪಣ್ಣ ಮಾಧ್ಯಮಕ್ಕೆ ತಿಳಿಸಿದ್ದಾರೆ.
ರಾಜ್ಯದಲ್ಲಿ ಗುತ್ತಿಗೆದಾರರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡಲು ಮುಖ್ಯಮಂತ್ರಿ ಭೇಟಿಗೆ ಎಷ್ಟೇ ಮನವಿ ಸಲ್ಲಿಸಿದರೂ ಅನುಮತಿ ದೊರೆಯಲಿಲ್ಲ. ಹಾಗಾಗಿ ರಾಜ್ಯದ ಗುತ್ತಿಗೆದಾರರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಹಾಗು ಭ್ರಷ್ಟಾಚಾರದ ಬಗ್ಗೆ ಪ್ರಧಾನಿಗೆ ಪಾತ್ರ ಬರೆಯಲಾಗಿದೆ. ಮುಂದೆ ಪ್ರಧಾನಿಯವರನ್ನು ಭೇಟಿ ಮಾಡಲಾಗುವುದು. ಮುಖಮಂತ್ರಿಗಳು ಎಲ್ಲ ಸಮಸ್ಯೆಗಳ ಬಗ್ಗೆ ಪರಿಹಾರ ಕೈಗೊಳ್ಳಲು ಮಾತುಕತೆಗೆ ಕರೆಯದಿದ್ದರೆ ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಡಿ. ಕೆಂಪಣ್ಣ ಹೇಳಿದರು.
ರಾಜ್ಯದಲ್ಲಿ ಸುಮಾರು 17 ಸಾವಿರ ಗುತ್ತಿಗೆದಾರರಿದ್ದರೂ ಹೊರಗಿನ 296 ಗುತ್ತಿಗೆದಾರರು ಪ್ಯಾಕೇಜ್ ಪದ್ಧತಿ ಅಡಿ ಶೇಕಡಾ 90ರಷ್ಟು ಕೆಲಸಗಳನ್ನು ಪಡೆಯುತ್ತಿದ್ದಾರೆ. ಇದು ರಾಜ್ಯದ ಗುತಿತ್ಗೆದಾರರ ಮೇಲೆ ಪರಿಣಾಮ ಬೀರಿದೆ. ಈಗಾಗಲೇ ಪೂರ್ಣವಾಗಿರುವ ಕಾಮಗಾರಿಗಳ ಮೊತ್ತ 25,000 ಕೋಟಿಗಳನ್ನು ಕೂಡಲೇ ಬಿಡುಗಡೆ ಮಾಡುವುದು ಹಾಗು ಪ್ಯಾಕೇಜ್ ಪದ್ದತಿಯನ್ನು ರದ್ದುಗೊಳಿಸುವುದು ನಮ್ಮ ತಕ್ಷಣದ ಬೇಡಿಕೆಯಾಗಿದೆ ಎಂದು ಅವರು ಹೇಳಿದರು.