
ಬೆಂಗಳೂರು: ನಾಮ ಪಾತ್ರ ಸಲ್ಲಿಕೆ ಕೊನೆ ದಿನಕ್ಕೆ ಇನ್ನು ಕೆಲವೇ ಘಂಟೆಗಳು ಬಾಕಿ ಇರುವಂತೆಯೇ ಕಾಂಗ್ರೆಸ್ ಪಕ್ಷ ರಾಜ್ಯ ವಿಧಾನಪರಿಷತ್ ಚುನಾವಣೆಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಹಲವರ ಲಾಬಿ, ಒತ್ತಡಗಳ ನಡುವೆ ಹೈಕಮಾಂಡ್ ನಾಗರಾಜ್ ಯಾದವ್ ಮತ್ತು ಅಬ್ದುಲ್ ಜಬ್ಬಾರ್ ಅವರಿಗೆ ಟಿಕೆಟ್ ನೀಡಿದೆ.
ಅಬ್ದುಲ್ ಜಬ್ಬಾರ್ ದಾವಣಗೆರೆಯವರಾಗಿದ್ದು ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷರಾಗಿದ್ದಾರೆ. ನಾಗರಾಜ್ ಯಾದವ್ ಕೆಪಿಸಿಸಿ ವಕ್ತಾರರಾಗಿದ್ದು ಹೆಚ್ಚಾಗಿ ಟಿವಿ ಪ್ಯಾನೆಲ್ ಚರ್ಚೆಗಳಲ್ಲಿ ಪಕ್ಷವನ್ನು ಪ್ರತಿನಿಧಿಸುತ್ತಿರುತ್ತಾರೆ.
ಮಂಗಳವಾರ ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು ಬಿಜೆಪಿ ಇನ್ನು ಕೂಡ ಟಿಕೆಟ್ ಫೈನಲ್ ಮಾಡಿಲ್ಲ. ಬಿಜೆಪಿ ಅಭ್ಯರ್ಥಿಗಳನ್ನು ನೋಡಿ ತನ್ನ ಅಭ್ಯರ್ಥಿಗಳನ್ನು ಇಳಿಸಲು ನಿರ್ಧರಿಸಿದ್ದ ಕಾಂಗ್ರೆಸ್ ಬಿಜೆಪಿಗಿಂತ ಮೊದಲೇ ಅಭ್ಯರ್ಥಿಗಳ ಘೋಷಣೆ ಮಾಡಿದೆ.












































