
ನವದೆಹಲಿ: ಬಲವಂತದ ಧಾರ್ಮಿಕ ಮತಾಂತರದ ಬಗ್ಗೆ ಕೇಂದ್ರದ ಮಧ್ಯಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಕೇಳಿಕೊಂಡಿದ್ದು ಬಲವಂತದ ಧಾರ್ಮಿಕ ಮತಾಂತರ ರಾಷ್ಟ್ರೀಯ ಭದ್ರತೆ ಸೇರಿದಂತೆ ಹಲವು ವಿಷಯಗಳ ಮೇಲೆ ಪರಿಣಾಮ ಬೀರುವ ‘ಬಹಳ ಗಂಭೀರ’ ವಿಚಾರವೆಂದು ಪರಿಗಣಿಸಿದೆ.
ಸುಪ್ರೀಂ ಕೋರ್ಟ್, ಸೋಮವಾರ ಕೂಡಲೇ ಮಧ್ಯಪ್ರವೇಶಿಸಿ ಈ ಬಲವಂತದ ಮತಾಂತರ ಆಚರಣೆಯನ್ನು ಪರಿಶೀಲಿಸುವಂತೆ ಕೇಂದ್ರ ಸರಕಾರವನ್ನು ಕೇಳಿದೆ. ಬಲವಂತದ ಧಾರ್ಮಿಕ ಮತಾಂತರಗಳನ್ನು ನಿಲ್ಲಿಸದಿದ್ದರೆ ಬಹಳ ಕಠಿಣ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ.
ಬೆದರಿಕೆ, ಉಡುಗೊರೆ ಮತ್ತು ಹಣಕಾಸಿನ ಆಮಿಷದ ಮೂಲಕ ಮಾಡುವ ಮೋಸದ ಹಾಗು ಬಲವಂತದ ಧಾರ್ಮಿಕ ಮತಾಂತರವನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡುವಂತೆ ಕೋರಿ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ್ದರು. ಈ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತ ಬಲವಂತದ ಮತಾಂತರದ ಬಗ್ಗೆ ಆತಂಕ ವ್ಯಕ್ತಪಡಿಸಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಂ.ಆರ್. ಶಾ ಮತ್ತು ಹಿಮಾ ಕೊಹ್ಲಿ ಅವರಿದ್ದ ಪೀಠವು, ಆಮಿಷಗಳ ಮೂಲಕ ನಡೆಯುವ ಮತಾಂತರಗಳನ್ನು ತಡೆಯುವ ಕ್ರಮಗಳನ್ನು ಪಟ್ಟಿ ಮಾಡಲು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಕೇಳಿದೆ. ‘ಇದು ರಾಷ್ಟ್ರದ ಭದ್ರತೆ, ಧರ್ಮ ಮತ್ತು ಆತ್ಮಸಾಕ್ಷಿಯ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುವ ಅತ್ಯಂತ ಗಂಭೀರ ಸಮಸ್ಯೆಯಾಗಿದೆ. ಆದ್ದರಿಂದ, ಭಾರತ ಸರ್ಕಾರವು ತಮ್ಮ ನಿಲುವನ್ನು ಸ್ಪಷ್ಟಪಡಿಸುವುದು ಮತ್ತು ಅಂತಹ ಬಲವಂತದ ಮತಾಂತರವನ್ನು ತಡೆಯಲು ಮುಂದೆ ಯಾವ ಕ್ರಮಗಳನ್ನು ತೆಗೆದುಕೊಳ್ಳಬಹುದೆಂಬುದರ ಬಗ್ಗೆ ತಿಳಿಸುವುದು ಒಳ್ಳೆಯದು’ ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿದೆ.












































