
ಮುಂಬಯಿ: ನಿನ್ನೆ ಉದ್ಧವ್ ಠಾಕ್ರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಮಹಾರಾಷ್ಟ್ರದಲ್ಲಿ ರಾಜಕೀಯ ಗೊಂದಲಕ್ಕೆ ತೆರೆ ಬಿದ್ದಿದೆ. ಶಿವಸೇನಾ ಬಂಡಾಯ ಶಾಸಕರ ಬೆಂಬಲದೊಂದಿಗೆ ಬಿಜೆಪಿಯ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಇಂದು ಸಂಜೆ 7 ಗಂಟೆಗೆ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಇಂದು ಸಂಜೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಶಿವಸೇನೆಯ ಬಂಡಾಯ ಶಾಸಕ ಏಕನಾಥ್ ಶಿಂಧೆ ಕೂಡ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ದಿನದ ನಂತರ ಬಿಜೆಪಿ ಸರಕಾರ ರಚನೆಗೆ ಮುಂದಾಗಿದೆ.
ದೇವೇಂದ್ರ ಫಡ್ನವಿಸ್ ಹಾಗು ಏಕನಾಥ್ ಶಿಂಧೆ ಇಬ್ಬರೂ ನಾಯಕರು ರಾಜಭವನಕ್ಕೆ ತೆರಳಿದ್ದು, ಅಲ್ಲಿ ಅವರು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರನ್ನು ಭೇಟಿಯಾಗಲಿದ್ದು, ಶಾಸಕರ ಬೆಂಬಲ ಪತ್ರವನ್ನು ಸಲ್ಲಿಸಲಿದ್ದಾರೆ ಮತ್ತು ಸರ್ಕಾರ ರಚನೆಗೆ ಔಪಚಾರಿಕವಾಗಿ ಹಕ್ಕು ಮಂಡಿಸಲಿದ್ದಾರೆ.
ಮುಂಜಾನೆ ಶಿಂಧೆ ಗೋವಾದಿಂದ ಮುಂಬೈಗೆ ಆಗಮಿಸಿ ದೇವೇಂದ್ರ ಫಡ್ನವಿಸ್ ನಿವಾಸಕ್ಕೆ ತೆರಳಿದ್ದರು. ರಾಜ್ಯಪಾಲರ ಭವನಕ್ಕೆ ತೆರಳುವ ಮುನ್ನ ಇಬ್ಬರೂ ಸಂಕ್ಷಿಪ್ತ ಸಭೆ ನಡೆಸಿದರು.
ಆದರೂ ದೇವೇಂದ್ರ ಅವರೇ ಮುಖ್ಯಮಂತ್ರಿ ಆಗುತ್ತಾರ ಅನ್ನುವ ಬಗ್ಗೆ ಅಧಿಕೃತ ಪ್ರಕಟಣೆ ಬಂದಿಲ್ಲ. ಹಾಗಾಗಿ ಕೊನೆ ಕ್ಷಣದ ಬದಲಾವಣೆ ಬಗ್ಗೆ ಇನ್ನೂ ಕುತೂಹಲ ಮುಂದುವರೆದಿದೆ.
ಸುದ್ದಿಯನ್ನು ನೇರವಾಗಿ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ ನಮ್ಮ ವಾಟ್ಸಾಪ್ ಗುಂಪು ಸೇರಿರಿ:
https://chat.whatsapp.com/DI9IChQqUYvJCGBVIqBvwL












































