
ಥಾಣೆ: ಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ ಅಮಾನತುಗೊಂಡ ಭಾರತೀಯ ಜನತಾ ಪಕ್ಷದ (ಬಿಜೆಪಿ) ವಕ್ತಾರೆ ನೂಪುರ್ ಶರ್ಮಾ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಬೆಂಬಲಿಸಿ ಪೋಸ್ಟ್ ಮಾಡಿದ್ದಕ್ಕಾಗಿ ಭಿವಂಡಿಯಲ್ಲಿ ಜನರ ಗುಂಪೊಂದು ಮುಸ್ಲಿಂ ಯುವಕನನ್ನು ಥಳಿಸಿದೆ.
ಭಿವಂಡಿಯ ಕೇಸರ್ ಬಾಗ್ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ನೂಪುರ್ ಶರ್ಮ ಬೆಂಬಲಿಸಿದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾದ್ ಅಶ್ಫಾಕ್ ಅನ್ಸಾರಿ ಅವರ ನಿವಾಸಕ್ಕೆ ಹೊಕ್ಕ ಭಾರೀ ಸಂಖ್ಯೆಯ ಜನರು ಆತನನ್ನು ಥಳಿಸಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ಸಾದ್, ನೂಪುರ್ ಶರ್ಮಾ ಅವರ ವಿವಾದಾತ್ಮಕ ಹೇಳಿಕೆಗಳನ್ನು ಬೆಂಬಲಿಸಿದ್ದಾರೆ. ಸಾದ್ ಅವರ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ತಕ್ಷಣ, ಕೆಲವರು ಅವರ ಮನೆಗೆ ಬಂದು ಬೆದರಿಸಿ ಕ್ಷಮೆ ಯಾಚಿಸುವಂತೆ ಮಾಡಿದ್ದಾರೆ.
ಘಟನೆಯ ನಂತರ ಭಿವಂಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ಪೊಲೀಸರು ಸಾದ್ ವಿರುದ್ಧ ಪ್ರಕರಣ ದಾಖಲಿಸಿ ವಶಕ್ಕೆ ಪಡೆದಿದ್ದಾರೆ.