
ಮುಂಬಯಿ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ನಿರ್ಣಾಯಕ ಘಟ್ಟಾಕೆ ತಲುಪಿದ್ದು ವಿಶ್ವಾಸಮತ ಯಾಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬುಧವಾರ ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಮಹಾ ರಾಜಕೀಯ ಬಿಕ್ಕಟ್ಟಿಗೆ ಬಹುತೇಕ ತೆರೆ ಬಿದ್ದಂತಾಗಿದ್ದು ಎರಡೂವರೆ ವರ್ಷಗಳ ಶಿವಸೇನೆ, ಕಾಂಗ್ರೆಸ್ ಹಾಗು ಎನ್.ಸಿ.ಪಿ ಸರಕಾರ ಕೆಳಗಿಳಿದಿದೆ.
ಮಹಾರಾಷ್ಟ್ರ ರಾಜ್ಯಪಾಲರು ನಾಳೆ ವಿಶ್ವಾಸಮತ ಯಾಚಿಸುವಂತೆ ನೀಡಿದ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಕೆಲವೇ ಕ್ಷಣಗಳಲ್ಲಿ ಫೇಸ್ಬುಕ್ ಲೈವ್ ಬಂದ ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು. ಜತೆಗೆ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಹೇಳಿದರು.
ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರಕ್ಕೆ ವಿಶ್ವಾಸಮತ ಯಾಚಿಸುವಂತೆ ರಾಜ್ಯಪಾಲರು ನೀಡಿದ ಆದೇಶವನ್ನು ಶಿವಸೇನೆಯ ಮುಖ್ಯ ಸಚೇತಕ ಸುನೀಲ್ ಪ್ರಭು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ರಾಜ್ಯಪಾಲರ ಆದೇಶದಂತೆ ಗುರುವಾರವೇ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಉದ್ಧವ್ ಸರಕಾರಕ್ಕೆ ಸೂಚಿಸಿತ್ತು.
ಶಿವಸೇನಾ ಬಂಡಾಯ ಶಾಸಕರು ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರಿಗೆ ಸೂಚಿಸಿದ್ದು ಜುಲೈ ಮೊದಲ ವಾರದಲ್ಲಿ ಬಿಜೆಪಿ ಹಾಗು ಶಿವಸೇನಾ ಬಂಡಾಯ ಶಾಸಕರ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರುವ ಸಂಭವವಿದೆ. ಹಾಗಾದ ಪಕ್ಷದಲ್ಲಿ ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿ, ಹಾಗು ಬಂಡಾಯ ಶಾಸಕರ ನಾಯಕ ಶಿಂಧೆ ಉಪ ಮುಖ್ಯಮಂತ್ರಿ ಆಗುವ ಸಾಧ್ಯತೆಗಳಿವೆ.












































