
ಲಕ್ನೋ: ಮಾರ್ಚ್ 10 ರಂದು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಫಲಿತಾಂಶದ ಮುನ್ನವೇ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಸುರಕ್ಷತೆಯ ಬಗ್ಗೆ ಆರೋಪ ಮಾಡಿದ್ದಾರೆ.
ಮಂಗಳವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಖಿಲೇಶ್ ಯಾದವ್ ಚುನಾವಣಾ ಆಯೋಗದ ವಿರುದ್ಧ ಆರೋಪ ಮಾಡಿದ್ದು, ಇವಿಎಂಗಳನ್ನು ಅಧಿಕಾರಿಗಳು ಟ್ಯಾಂಪರಿಂಗ್ ಮಾಡಿದ್ದಾರೆ ಮತ್ತು ಇನ್ನು ಮುಂದೆ ನಾವು ಚುನಾವಣಾ ಆಯೋಗವನ್ನು ನಂಬುವುದಿಲ್ಲ ಎಂದು ಹೇಳಿದರು.
ವಾರಣಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಸ್ಥಳೀಯ ಅಭ್ಯರ್ಥಿಗಳಿಗೆ ಯಾವುದೇ ಮಾಹಿತಿ ನೀಡದೆ ಇವಿಎಂಗಳನ್ನು ಸಾಗಿಸುತ್ತಿದ್ದಾರೆ. ಇವಿಎಂಗಳನ್ನು ಈ ರೀತಿ ಸಾಗಿಸುತ್ತಿದ್ದರೆ ನಾವು ಎಚ್ಚೆತ್ತುಕೊಳ್ಳಬೇಕು.ಇದು ಕಳ್ಳತನವಾಗಿದೆ. ಇದರ ವಿರುದ್ಧ ನಾವು ನ್ಯಾಯಾಲಯದ ಮೊರೆ ಹೋಗಬಹುದು ಆದರೆ ಅದಕ್ಕೂ ಮೊದಲು ನಾನು ಪ್ರಜಾಪ್ರಭುತ್ವವನ್ನು ಉಳಿಸಲು ಜನರಲ್ಲಿ ಮನವಿ ಮಾಡುತ್ತೇನೆ ಎಂದು ಅಖಿಲೇಶ್ ಯಾದವ್ ಹೇಳಿದರು.
” ಎಸ್ಪಿ-ಮೈತ್ರಿಕೂಟದ ಎಲ್ಲಾ ಅಭ್ಯರ್ಥಿಗಳು ಮತ್ತು ಬೆಂಬಲಿಗರು ತಮ್ಮ ಕ್ಯಾಮೆರಾಗಳೊಂದಿಗೆ ಸಿದ್ಧರಾಗಿರಬೇಕು. ಮತ ಎಣಿಕೆ ಸಂದರ್ಭ ಅಕ್ರಮ ತಡೆಯಲು, ಪ್ರಜಾಪ್ರಭುತ್ವ ಮತ್ತು ಭವಿಷ್ಯವನ್ನು ರಕ್ಷಿಸಲು, ಮತ ಎಣಿಕೆ ಸಂದರ್ಭ ಸೈನಿಕರಾಗಿರಿ” ಎಂದು ಅಖಿಲೇಶ್ ಯಾದವ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಿಂದಿಯಲ್ಲಿ ಬರೆದಿದ್ದಾರೆ.












































